Publish Date: Mon, 29 May 2023 (07:55 IST)
Updated Date: Mon, 29 May 2023 (09:57 IST)
ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂತನ ಸಚಿವರಿಗೆ ಹಲವು ಟಾರ್ಗೆಟ್ಗಳನ್ನ ನೀಡಿದ್ದಾರೆ.
ಗ್ಯಾರಂಟಿ ಯೋಜನೆಗಳ ಜಾರಿ ವಿಳಂಬ ಆಗಿದ್ದರೂ ಸಹ, ಲೋಕಸಭಾ ಚುನಾವಣೆ ಕಾರಣಕ್ಕೆ ಸಚಿವರಿಗೆ ಟಾರ್ಗೆಟ್ ಫಿಕ್ಸ್ ಮಾಡಿದ್ದಾರೆ.
ಗ್ಯಾರಂಟಿ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಬೇಕು. ಅಧಿಕಾರಿಗಳ ಮೇಲೆ ನಿಗಾ ಇಟ್ಟು ಭ್ರಷ್ಟಾಚಾರಕ್ಕೆ ಬರೆ ಎಳೆಯಬೇಕು. ಜನರ ಸಮಸ್ಯೆಗಳನ್ನು ಆಲಿಸಿ ತಮ್ಮ ತಮ್ಮ ಕ್ಷೇತ್ರದಲ್ಲೇ ಸಮಸ್ಯೆ ಬಗೆಹರಿಸಲು ಬೇಕಾದ ಕ್ರಿಯಾಶೀಲತೆಯನ್ನು ರೂಢಿಸಿಕೊಳ್ಳಿ.
ಗ್ಯಾರಂಟಿಗಳು ಜನರಿಗೆ ಸಮರ್ಪಕವಾಗಿ ತಲುಪುವಂತೆ ಪ್ರಾಮಾಣಿಕವಾಗಿ ಶ್ರಮಿಸಬೇಕು. ಹಿಂದಿನ ಬಾರಿಯ ತಪ್ಪುಗಳು ಈ ಬಾರಿ ಮರುಕಳಿಸಬಾರದು. ಖಾತೆ ಹಂಚಿಕೆ ಸದ್ಯದಲ್ಲೇ ಪೂರ್ಣಗೊಳ್ಳಲಿದೆ. ಸಚಿವರೆಲ್ಲ ಸಕ್ರಿಯರಾಗಿ. ಸರ್ಕಾರವನ್ನು, ಸರ್ಕಾರದ ಸವಲತ್ತುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಬೇಕು.
ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಲಾಗಿದೆ. ಹೀಗಾಗಿ ನಿಮಗೆ ವಹಿಸಿರುವ ಟಾರ್ಗೆಟ್ ಕಡೆಗೆ ಹೆಚ್ಚಿನ ಗಮನ ಹರಿಸಿ ಕೆಲಸ ಮಾಡಿ ಎಂದು ತಮ್ಮನ್ನು ಭೇಟಿಯಾಗಲು ಬಂದ ಸಚಿವರಿಗೆ ತಿಳಿಸಿ ಸಿಎಂ ಶುಭಹಾರೈಸಿದ್ದಾರೆ.