Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಘೋಷಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ನ ಕೆಲವು ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಾರಿಯ ಬಜೆಟ್ ನಲ್ಲಿ ಕೆಲವು ಪ್ರದೇಶಗಳಿಗೆ ಮಾತ್ರ ಅನುದಾನ ಘೋಷಿಸಿ ಕರಾವಳಿ, ಉತ್ತರ ಕರ್ನಾಟಕದ ಭಾಗಗಳನ್ನು ನಿರ್ಲಕ್ಷಿಸಿದ್ದಕ್ಕೆ ಹಿರಿಯ ನಾಯಕ ಎಚ್ ಕೆ ಪಾಟೀಲ್ ಸಿಡಿದೆದ್ದಿದ್ದಾರೆ.
ಈ ಬಗ್ಗೆ ಸಿಎಂ ಕುಮಾರಸ್ವಾಮಿ ಮತ್ತು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯಗೆ ಪತ್ರ ಬರೆದು ಎಚ್ ಕೆ ಪಾಟೀಲ್ ಆಗಿರುವ ಕುಂದು ಕೊರತೆಯನ್ನು ತಕ್ಷಣವೇ ನೀಗಿಸಲು ಒತ್ತಾಯಿಸಿದ್ದಾರೆ. ಉತ್ತರ ಕರ್ನಾಟಕದ ಭಾಗ ಮಾತ್ರವಲ್ಲ, ಅಲ್ಪಸಂಖ್ಯಾತರನ್ನೂ ಕಡೆಗಣಿಸಿದ್ದಕ್ಕೆ ಎಚ್ ಕೆ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಕುರಿತಂತೆ ಕೇಂದ್ರ ಸರ್ಕಾರವನ್ನು ಟೀಕಿಸುವ ನಾವೇ ಇಲ್ಲಿ ಬೆಲೆ ಏರಿಕೆ ಮಾಡಿರುವ ಬಗ್ಗೆಯೂ ಎಚ್ ಕೆ ಪಾಟೀಲ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಇನ್ನೊಂದೆಡೆ ಕರಾವಳಿ ಭಾಗದ ಬಿಜೆಪಿ ಶಾಸಕರು ಒಂದಾಗಿ ಒಕ್ಕೂಟ ರಚಿಸಿಕೊಂಡು ಸರ್ಕಾರದ ವಿರುದ್ಧ ಹೋರಾಡಲು ತೀರ್ಮಾನಿಸಿದ್ದಾರೆ. ನಿನ್ನೆ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿರುವ ಈ ಭಾಗದ ಶಾಸಕರು ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ವೇಳೆಗೆ ಈ ಬಗ್ಗೆ ಪ್ರಸ್ತಾಪಿಸಲು ತೀರ್ಮಾನಿಸಿದ್ದಾರೆ. ಅಂತೂ ಸಿಎಂ ಎಚ್ ಡಿಕೆಗೆ ಈಗ ಬಜೆಟ್ ಕಗ್ಗಂಟಾಗಿ ಪರಿಣಮಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.