Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ಗ್ರಾಮೀಣ ಭಾಗದ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಪರಿಹಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಕುರಿತು ಗ್ರಾಹಕರಿಗೆ ಮಾಹಿತಿ ನೀಡಲು ವಿದ್ಯುತ್ ಅದಾಲತ್ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ 104 ಹಳ್ಳಿಗಳಲ್ಲಿ ಶನಿವಾರ(ಜೂನ್ 18) ನಡೆಯಲಿದೆ.
ಬೆಸ್ಕಾಂನ ಆಡಳಿತ ನಿರ್ದೇಶಕರಿಂದ ಹಿಡಿದು ಹಿರಿಯ ಅಧಿಕಾರಿಗಳು ವಿದ್ಯುತ್ ಅದಾಲತ್ನಲ್ಲಿ ಖುದ್ದು ಭಾಗವಹಿಸಿ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಸೂಚಿಸಲಿದ್ದಾರೆ. ಇದರೊಂದಿಗೆ ಕಾಲಮಿತಿಯಲ್ಲಿ ವಿದ್ಯುತ್ ಸಮಸ್ಯೆಗಳಿಗೆ ಪರಿಹಾರವನ್ನೂ ಒದಗಿಸಲಿದ್ದಾರೆ.
ಗ್ರಾಮೀಣ ಭಾಗದ ಜನರ ವಿದ್ಯುತ್ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು ಎನ್ನುವ ಸದುದ್ದೇಶದಿಂದ ಪ್ರತಿ ತಿಂಗಳ ಮೂರನೇ ಶನಿವಾರ ವಿದ್ಯುತ್ ಅದಾಲತ್ ನಡೆಸಲು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಎಲ್ಲಾ ಎಸ್ಕಾಂಗಳಿಗೆ ಸೂಚಿಸಿದ್ದರು.
ವಿದ್ಯುತ್ ಸಂಬಂಧಿತ ಕುಂದು-ಕೊರತೆಗಳನ್ನು ಆಲಿಸಿ ಅದಕ್ಕೆ ಸ್ಥಳದಲ್ಲೇ ಪರಿಹಾರ ಸೂಚಿಸುವುದು ಅಥವ ನಿಗದಿತ ಕಾಲಮಿತಿಯೊಳಗೆ ನಿವಾರಿಸುವ ಉದ್ದೇಶದಿಂದ ಎಲ್ಲಾ ಎಸ್ಕಾಂಗಳಲ್ಲಿ ಅದಾಲತ್ ಏಕಕಾಲದಲ್ಲಿ ನಡೆಯಲಿದೆ.
ಬೆಸ್ಕಾಂ ವ್ಯಾಪ್ತಿಯ 104 ಹಳ್ಳಿಗಳಲ್ಲಿ ಶನಿವಾರ ಅದಾಲತ್ ನಡೆಯಲಿದ್ದು, ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಬೆಸ್ಕಾಂನ ಮುಖ್ಯ ಪ್ರಧಾನ ವ್ಯವಸ್ಥಾಪಕ(ಆಪರೇಷನ್ಸ್) ಎಂ.ಎಲ್ ನಾಗರಾಜು ತಿಳಿಸಿದ್ದಾರೆ.