Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ಲಾಕ್ಡೌನ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದರೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ಸರ್ಕಾರ ಘೋಷಣೆ ಮಾಡುವವರೆಗೂ ಲಾಕ್ಡೌನ್ ಮಾಡಲ್ಲ ಎಂದು ಸ್ಪಷ್ಟಪಡಿಸಿದರು. ಲಾಕ್ಡೌನ್ ಬಗ್ಗೆ ಜನರನ್ನು ತಪ್ಪುದಾರಿಗೆ ಎಳೆಯಬಾರದು ಎಂದು ತಾಕೀತು ಮಾಡಿದರು.
ಓಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಮಂಗಳವಾರ ತಜ್ಞರ ಜೊತೆ ಸಭೆ ನಡೆಸಲಾಗುವುದು. ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸಭೆ ಆರಂಭವಾಗಲಿದೆ ಎಂದು ಇದೇ ಸಂದರ್ಭದಲ್ಲಿ ಸುಧಾಕರ್ ತಿಳಿಸಿದರು. ಕಳೆದ 12 ದಿನಗಳಲ್ಲಿ ವಿದೇಶದಿಂದ ಬಂದವರ ಮೇಲೆ ನಿಗಾ ಇಡಲಾಗಿದೆ. ಅದರಲ್ಲೂ ಆಫ್ರಿದಿಂದ ಬಂದವರ ಮೇಲೆ ಹೆಚ್ಚಿನ ನಿಗಾ ಇಡಲಾಗಿದೆ ಎಂದು ಡಾ. ಕೆ ಸುಧಾಕರ್ ತಿಳಿಸಿದರು.
ನನಗೆ ತಿಳಿದಿರುವ ಮಾಹಿತಿ ಪ್ರಕಾರ ಓಮಿಕ್ರಾನ್ ಸೋಂಕು ಇದು ಬಹಳ ವೇಗವಾಗಿ ಹರಡುತ್ತಿದೆ. ಆದರೆ ಈ ಸೋಂಕು ಗಂಭೀರ ಪ್ರಮಾಣದ್ದು ಅಲ್ಲ ಎಂದು ತಜ್ಞರು ಹೇಳುತ್ತಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.
ದಕ್ಷಿಣ ಆಫ್ರಿಕಾ, ಯು.ಕೆ, ಬೆಲ್ಜಿಯಂ, ನೆದರ್ಲೇಂಡ್ ಸೇರಿದಂತೆ ಹಲವು ದೇಶಗಳಲ್ಲಿ ಓಮಿಕ್ರಾನ್ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಓಮಿಕ್ರಾನ್ ಸೋಂಕು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಮಂಗಳವಾರ ಆರೋಗ್ಯ ಇಲಾಖೆ ಹಾಗೂ ತಾಂತ್ರಿಕ ಸಲಹಾ ಸಮಿತಿ ತಜ್ಞರ ಜೊತೆ ಸುಧಾಕರ್ ಸಭೆ ನಡೆಸಲಿದ್ದಾರೆ.