Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ರಾಜ್ಯದಲ್ಲಿ ಇನ್ನೂ 4 ದಿನ ಮಳೆ ಅಬ್ಬರ ಮುಂದುವರೆಯಲಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಜನ ತತ್ತರಿಸಿದ್ದು, ನೂರಾರು ಮನೆಗಳಿಗೆ ನೀರು ನುಗ್ಗಿದೆ. ತೋಟ, ಭತ್ತದ ಗದ್ದೆಗಳಿಗೆ, ಮೀನುಗಾರರ ದೋಣಿಗಳಿಗೂ ನೀರು ನುಗ್ಗಿ ಸಾಕಷ್ಟು ಹಾನಿ ಮಾಡಿದೆ.
ಅಂದಾಜು 40 ಕೋಟಿಗೂ ಅಧಿಕ ಹಾನಿಯಾಗಿದ್ದು ಜನ ಪರಿಹಾರಕ್ಕೆ ಆಗ್ರಹಿಸಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ, ಆಲೂರು ಹಾಗೂ ಪಕ್ಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಹೇಮಾವತಿ ನದಿಗೆ ಒಳಹರಿವು ಹೆಚ್ಚಾಗಿದೆ. 39,500 ಕ್ಯೂಸೆಕ್ ನೀರನ್ನು ಆರು ಕ್ರಸ್ಟ್ ಗೇಟ್ಗಳ ಮೂಲಕ ಹೊರ ಬಿಡಲಾಗುತ್ತಿದೆ.
ಹಾಸನ ಜಿಲ್ಲೆಯಲ್ಲಿ ಒಂದು ವಾರದಿಂದ ಪ್ರತಿನಿತ್ಯ ಸರಾಸರಿ 25 ರಿಂದ 30 ಮಿಮಿ ಮಳೆಯಾಗುತ್ತಿದ್ದು, ಮಳೆಗೆ ಈವರೆಗೆ ಜಿಲ್ಲೆಯಲ್ಲಿ 350 ಮನೆಗಳು ಕುಸಿತಗೊಂಡಿದೆ. 450 ಕೋಟಿಗೂ ಹೆಚ್ಚು ನಷ್ಟವಾಗಿದೆ. ಕೃಷ್ಣ ನದಿ ಆರ್ಭಟಕ್ಕೆ ರಾಯಚೂರು ಜಿಲ್ಲೆಯಲ್ಲಿ ಹಲವು ಗ್ರಾಮಗಳು ಸಂಕಷ್ಟಕ್ಕೆ ಸಿಲುಕಿವೆ.
ನದಿ ತಟದಲ್ಲಿರುವ ಬೂರ್ದಿಪಾಡ ಗ್ರಾಮ ಪ್ರತೀ ಬಾರಿ ಪ್ರವಾಹದ ಭೀತಿ ಎದುರಿಸುತ್ತಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ಮಳೆಯಿಂದ ರಸ್ತೆಗಳೇ ಗದ್ದೆಯಂತಾಗಿದೆ. ಇಲ್ಲಿನ ವಿಠ್ಠಲ ನಗರದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ರಸ್ತೆ ಸಂಪೂರ್ಣ ಹಾಳಾಗಿದೆ.