Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ಹಿಜಾಬ್, ಕೇಸರಿ ಶಾಲು ವಿವಾದ ಕೇವಲ ರಾಜ್ಯದಲ್ಲಿ ಮಾತ್ರವಲ್ಲ ಇಡೀ ದೇಶವನ್ನೇ ವ್ಯಾಪಿಸಿದೆ.
ಸದ್ಯ ಕೋರ್ಟ್ ತೀರ್ಮಾನಕ್ಕಾಗಿ ಕಾದು ಕುಳಿತಿದ್ದಾರೆ. ಸಮವಸ್ತ್ರ ಸಂಘರ್ಷದ ಹಿನ್ನೆಲೆ ಬಂದ್ ಆಗಿದ್ದ ಶಾಲೆಗಳು ಇಂದಿನಿಂದ ಆರಂಭಗೊಂಡಿವೆ. 9, 10ನೇ ತರಗತಿ ವಿದ್ಯಾರ್ಥಿಗಳು ಶಾಲೆಯತ್ತ ಮುಖ ಮಾಡಿದ್ದಾರೆ.
ಶಾಲೆಗಳಲ್ಲಿ ಅಹಿತಕರ ಘಟನೆ ನಡೆಯದಂತೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಸೂಕ್ಷ್ಮ ಪ್ರದೇಶಗಳಿಗೆ ಡಿಸಿ, ಎಸ್ಪಿ ಭೇಟಿ ನೀಡಬೇಕು. ಶಾಲಾ ಆಡಳಿತ ಮಂಡಳಿಗಳ ಜತೆ ಸಂಪರ್ಕದಲ್ಲಿರಬೇಕು. ಹೈಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
ಅಧಿಕಾರಿಗಳು ಮೇಲಿನ ಆದೇಶಗಳಿಗೆ ಕಾಯಬಾರದು. ಸಂದರ್ಭಕ್ಕೆ ತಕ್ಕಂತೆ ನೀವೇ ಕ್ರಮ ಕೈಗೊಳ್ಳಿ ಅಂತ ಜಿಲ್ಲಾಧಿಕಾರಿಗಳು, ಎಸ್ಪಿಗಳಿಗೆ ಸೂಚನೆ ನೀಡಿದ್ದಾರೆ.
ಇಂದಿನಿಂದ 9, 10ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆ ಶುರುವಾಗಿದೆ. ಅಹಿತಕರ ಘಟನೆ ನಡೆಯದಂತೆ ಶಾಲೆಗಳ ಬಳಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ದಾವಣಗೆರೆ, ಉಡುಪಿ, ಶಿವಮೊಗ್ಗ, ಮೈಸೂರು, ತುಮಕೂರು ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿರುವ ಶಾಲೆಗಳ ಬಳಿ ಬಿಗಿಬಂದೋಬಸ್ತ್ ಮಾಡಲಾಗಿದೆ.