Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ಕರ್ನಾಟಕದಲ್ಲಿ ಸೆಪ್ಟೆಂಬರ್ ತಿಂಗಳ ಅಂತ್ಯದಲ್ಲೇ ಮುಂಗಾರು ಮುಕ್ತಾಯವಾಗಿದೆ. ಆದರೆ, ಚಂಡಮಾರುತ ಮತ್ತು ವಾಯುಭಾರ ಕುಸಿತದಿಂದಾಗಿ ಮಳೆ ಮುಂದುವರೆದಿತ್ತು. ಇದೀಗ 2 ದಿನಗಳಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿದೆ.
ಆದರೆ, ನಾಳೆಯಿಂದ ಕರ್ನಾಟಕಕ್ಕೆ ಹಿಂಗಾರು ಪ್ರವೇಶವಾಗುವ ಹಿನ್ನೆಲೆಯಲ್ಲಿ ಮತ್ತೆ ಮಳೆಯಾಗಲಿದೆ. ಅ. 21ರಿಂದ 23ರವರೆಗೆ ರಾಜ್ಯದಲ್ಲಿ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಕಡಿಮೆಯಾಗಿದ್ದು, ಅ. 21ರಿಂದ ಹಿಂಗಾರು ಮಳೆಯ ಅಬ್ಬರ ಶುರುವಾಗಲಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ರಾಮನಗರ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ 3 ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ. ಹಾಗೇ, ಬಾಗಲಕೋಟೆ, ಬೀದರ್, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಕಲಬುರ್ಗಿ, ಯಾದಗಿರಿಯಲ್ಲಿ ಒಣಹವೆ ಇರಲಿದೆ.
ಅ. 21ರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮತ್ತೆ ಮಳೆ ಪ್ರಮಾಣ ಹೆಚ್ಚಲಿದ್ದು, ಹಿಂಗಾರು ಮಳೆ ಪ್ರವೇಶದ ಲಕ್ಷಣಗಳು ಕಂಡುಬಂದಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನೈಋತ್ಯ ಮುಂಗಾರಿನಿಂದ ಎರಡು ವಾರಗಳಿಂದ ರಾಜ್ಯದಲ್ಲಿ ಭಾರೀ ಮಳೆಯಾಗಿತ್ತು. ಬೆಂಗಳೂರಿನಲ್ಲಿ ನಿನ್ನೆ ಕೂಡ ಮಳೆಯಾಗಿದ್ದು, ಹಲವೆಡೆ ಸುಮಾರು 2 ಗಂಟೆ ಮಳೆ ಸುರಿದಿದೆ. ಇಂದು ಕೂಡ ಬೆಂಗಳೂರಿನಲ್ಲಿ ಮಳೆ ಮುಂದುವರೆಯುವ ನಿರೀಕ್ಷೆಯಿದೆ.