Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ದೆಹಲಿಯಲ್ಲಿ ಗಂಭೀರ ಹಂತಕ್ಕೆ ತಲುಪಿರುವ ಮಾಲಿನ್ಯ ಪರಿಸ್ಥಿತಿಯನ್ನು ಸುಪ್ರೀಂಕೋರ್ಟ್ ಅಷ್ಟೇ ಗಂಭೀರವಾಗಿ ಪರಿಗಣಿಸಿದೆ.
ರಾಷ್ಟ್ರರಾಜಧಾನಿ ದೆಹಲಿ ಮತ್ತು ಸುತ್ತಲಿನ ನಗರಗಳಲ್ಲಿ ಮಾಲಿನ್ಯದ ಪ್ರಮಾಣ ಹೆಚ್ಚಾಗಿದ್ದು, ಅದನ್ನು ತುರ್ತು ಪರಿಸ್ಥಿತಿಯೆಂದು ಪರಿಗಣಿಸಿ, ನಿಯಂತ್ರಣಕ್ಕೆ ಕೂಡಲೇ ಕ್ರಮ ಕೈಗೊಳ್ಳಿ ಎಂದು ಕೇಂದ್ರ ಸರ್ಕಾರದಿಂದ ಹಿಡಿದು, ನಗರಾಡಳಿತಗಳವರೆಗೆ ಸುಪ್ರೀಂ ಸೂಚನೆ ನೀಡಿದೆ. ದೆಹಲಿ ಮಾಲಿನ್ಯದ ಪರಿಸ್ಥಿತಿ ಕುರಿತಂತೆ ಸಲ್ಲಿಕೆಯಾದ ಅರ್ಜಿಗಳ ಮತ್ತು ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಕೇಂದ್ರ, ದೆಹಲಿ ಆಪ್ ಸರ್ಕಾರಗಳು ಸಲ್ಲಿಸಿದ್ದ ವರದಿಯ ವಿಚಾರಣೆ ಇಂದು ನಡೆಯಿತು. ಈ ವೇಳೆ ಸಿಜೆಐ ಎನ್.ವಿ.ರಮಣ, ಎಲ್ಲವನ್ನೂ ನ್ಯಾಯಾಂಗವೇ ಹೇಳಲಿ ಎಂದು ಕುಳಿತುಕೊಳ್ಳಬಾರದು. ಪ್ರತಿಯೊಬ್ಬರೂ ತಮ್ಮದೇ ಆದ ಜವಾಬ್ದಾರಿಯನ್ನು ನಿಭಾಯಿಸಬೇಕು ಎಂದು ಖಡಕ್ ಆಗಿ ಹೇಳಿದ್ದಾರೆ.
ದೀಪಾವಳಿ ಹಬ್ಬ ಮುಗಿದು 10 ದಿನಗಳಾದರೂ ಪಟಾಕಿ ಹೊಡೆಯಲಾಗುತ್ತಿದೆ. ಆದರೆ ಮಾಲಿನ್ಯಕ್ಕೆ ಕಾರಣವೇನು ಎಂದು ಪ್ರಶ್ನಿಸಿದರೆ ಎಲ್ಲರೂ ರೈತರತ್ತ ಮಾತ್ರ ಬೆರಳು ತೋರಿಸುತ್ತಾರೆ. ಅವರು ಒಣಗಿದ ಪೈರು ಸುಡುತ್ತಿರುವುದರಿಂದಲೇ ವಾಯುಮಾಲಿನ್ಯ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಹೀಗೆ ಪಟಾಕಿ ನಿಷೇಧಿಸಿದ್ದರೂ ಈಗಲೂ ಅದನ್ನು ಸಿಡಿಸುತ್ತಿರುವವರ ವಿರುದ್ಧ ಇನ್ನೂ ಕ್ರಮ ಯಾಕೆ ಕೈಗೊಂಡಿಲ್ಲ ಎಂದು ಸಿಜೆಐ ಸರ್ಕಾರಗಳಿಗೆ ಪ್ರಶ್ನೆ ಮಾಡಿದ್ದಾರೆ.