Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಳಗಾವಿ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಕುರಿತಂತೆ ಉಡುಪಿ ಪೊಲೀಸರು ನಡೆಸುತ್ತಿರುವ ತನಿಖೆ ಇಂದು 5ನೇ ದಿನಕ್ಕೆ ಕಾಲಿಟ್ಟಿದ್ದು, ಹೊಸದೊಂದು ಟ್ವಿಸ್ಟ್ ಸಿಕ್ಕಿದೆ.
ಬೆಳಗಾವಿ ತಾಲೂಕಿನ ಬಡಸ ಗ್ರಾಮದ ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಮನೆಯನ್ನು ಹಿಂಡಲಗಾ ಗ್ರಾಮ ಪಂಚಾಯತಿ ಅಧ್ಯಕ್ಷ ನಾಗೇಶ್ ಮನ್ನೋಳ್ಕರ್ ಹಾಗೂ ಎನ್.ಎಸ್.ಪಾಟೀಲ್ ಸೇರಿ ಅವರ ಮನೆಯನ್ನು ಜಿಪಿಎ ಮಾಡಿಸಿಕೊಂಡಿದ್ದಾರೆ. ಈ ಮಹತ್ವದ ದಾಖಲೆಗಳು ಉಡುಪಿ ಪೊಲೀಸರಿಗೆ ತನಿಖೆಯಲ್ಲಿ ಸಿಕ್ಕಿವೆ ಎನ್ನಲಾಗಿದೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಕುರಿತಂತೆ ಉಡುಪಿ ಪೊಲೀಸರು ನಡೆಸುತ್ತಿರುವ ತನಿಖೆ ಇಂದು 5ನೇ ದಿನಕ್ಕೆ ಕಾಲಿಟ್ಟಿದೆ.
ಕಳೆದ ಐದು ದಿನಗಳಿಂದ ಬೆಳಗಾವಿಯಲ್ಲಿ ಬೀಡುಬಿಟ್ಟಿರುವ ಉಡುಪಿ ಪೊಲೀಸರು ಸಂತೋಷ್ ಪತ್ನಿ ಜಯಶ್ರೀ, ಆತನ ಕುಟುಂಬಸ್ಥರು, ಪ್ರಸ್ತುತ ಪಿಡಿಒ ವಸಂತಕುಮಾರಿ, ಹಿಂದಿನ ಪಿಡಿಒ ಗಂಗಾಧರ್ ನಾಯಿಕ್ ಅವರನ್ನು ತೀವ್ರ ವಿಚಾರಣೆ ನಡೆಸಿದ್ದರು.
ಮಂಗಳವಾರ(ನಿನ್ನೆ) ಗ್ರಾಮ ಪಂಚಾಯತಿ ಅಧ್ಯಕ್ಷರನ್ನು ಸೇರಿದಂತೆ 12 ಜನ ತುಂಡು ಗುತ್ತಿಗೆದಾರನ್ನು ಉಡುಪಿ ಪೊಲೀಸರು ವಿಚಾರಣೆ ನಡೆಸಿದ್ದರು.
ಈ ವೇಳೆ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಸಂತೋಷ್ ಮನೆಯನ್ನು ಗ್ರಾ.ಪಂ.ಅಧ್ಯಕ್ಷ ನಾಗೇಶ್ ಮನ್ನೋಳಕರ್ ಜಿಪಿಎ ಮಾಡಿಸಿಕೊಂಡಿದ್ರಾ? ಎನ್ನುವ ಮಾತುಗಳು ಕೇಳಿಬಂದಿವೆ.
ಹಿಂಡಲಗಾ ಗ್ರಾಪಂ ಅಧ್ಯಕ್ಷ ನಾಗೇಶ್ ಮನ್ನೋಳಕರ್, ಉದ್ಯಮಿ ಹಾಗೂ ಗ್ರಾ.ಪಂ ಸದಸ್ಯ ಎನ್.ಎಸ್.ಪಾಟೀಲ್ ಸೇರಿ ಮೃತ ಸಂತೋಷ್ ಪಾಟೀಲ್ ಮನೆಯನ್ನು ಜಿಪಿಎ ಮಾಡಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಉಡುಪಿ ಪೊಲೀಸರ ತನಿಖೆ ವೇಳೆ ಮಹತ್ವದ ಮಾಹಿತಿ ಲಭ್ಯವಾಗಿದೆ.